ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಪಟ್ಟಣದಲ್ಲಿ ಇದೇ ಮೊದಲ ಬಾರಿಗೆ ಪಟ್ಟಣದಾದ್ಯಂತ ನಾಗರಿಕ ಸಂಚಾರ ಸಂಪೂರ್ಣ ಸ್ಥಗಿತ

ಶ್ರೀನಿವಾಸಪುರ: ಪಟ್ಟಣದಲ್ಲಿ ಇದೇ ಮೊದಲ ಬಾರಿಗೆ ಪಟ್ಟಣದಾದ್ಯಂತ ನಾಗರಿಕ ಸಂಚಾರ ಸಂಪೂರ್ಣ ಸ್ಥಗಿಗೊಂಡಿತ್ತು. ಯಾರೊಬ್ಬರೂ ಮನೆಯಿಂದ ಹೊರಗೆ ಬರಲಿಲ್ಲ. ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಸಂಪೂರ್ಣ ಮುಚ್ಚಲಾಗಿತ್ತು. ಎಪಿಎಸಿ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ, ಬಸ್ ಹಾಗೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು. ಆಟೋಗಳು ರಸ್ತೆಗೆ ಇಳಿಯಲಿಲ್ಲ. ಯಾವುದೇ ವಾಹನ ಸಂಚಾರ ಇರಲಿಲ್ಲ.
ತಾಲ್ಲೂಕಿನ ರಾಯಲ್ಪಾಡು, ಗೌನಿಪಲ್ಲಿ, ರೋಣೂರು, ಯಲ್ದೂರು ಹಾಗೂ ರೋಜೇನಹಳ್ಳಿ ಕ್ರಾಸ್ನಲ್ಲಿ ಪ್ರಧಾನಿ ಮೋದಿ ಅವರ ಮನವಿಗೆ ಸ್ಪಂದಿಸಿ ಜನತಾ ಕರ್ಫ್ಯೂ ಆಚರಿಸಲಾಯಿತು. ಈ ಎಲ್ಲ ಕಡೆ ಅಂಗಡಿ ಮುಂಗಟ್ಟು ಮುಚ್ಚಲಾಗಿತ್ತು. ಜನರು ಮನೆಗಳಲ್ಲಿಯೇ ಉಳಿದರು.
ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ವಾಹನ ಸಂಚಾರ ಹೊರತುಪಡಿಸಿ ಜನ ಜೀವನ ಸಾಮಾನ್ಯವಾಗಿತ್ತು. ಜನರು ಕೃಷಿ ಚಟುವಟಿಕೆ ಹಾಗೂ ಜಾನುವಾರು ಪಾಲನೆಯಲ್ಲಿ ತೊಡಗಿದ್ದರು.
