ಕೆಸಿ ವ್ಯಾಲಿ ನೀರು ಕೆರೆಗಳಿಗೆ ಹರಿಸಲು ಪೂರಕವಾಗಿ ಪೈಪ್ ಅಳವಡಿಸಲು ಅಗೆಯಲಾಗಿರುವ ರಸ್ತೆಗಳನ್ನು ಮೇ.30 ರೊಳಗೆ ದುರಸ್ತಿ ಮಾಡಬೇಕು:ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ಕೆಸಿ ವ್ಯಾಲಿ ನೀರು ಕೆರೆಗಳಿಗೆ ಹರಿಸಲು ಪೂರಕವಾಗಿ ಪೈಪ್ ಅಳವಡಿಸಲು ಅಗೆಯಲಾಗಿರುವ ರಸ್ತೆಗಳನ್ನು ಮೇ.30 ರೊಳಗೆ ದುರಸ್ತಿ ಮಾಡಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ತಾಲ್ಲೂಕಿನ ಹೊಗಳಗೆರೆ ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಗುರುವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೆಸಿ ವ್ಯಾಲಿ ನೀರು ಹರಿಸಲು ಪೈಪ್ ಅಳವಡಿಸಲು ರಸ್ತೆಗಳನ್ನು ಅಗೆಯಲಾಗಿದೆ. ಅದರಿಂದ ಸಂಚಾರ ವ್ಯವಸ್ಥೆಗೆ ಧಕ್ಕೆ ಉಂಟಾಗಿದೆ. ಪೈಪ್ ಲೈನ್ ಗುತ್ತಿಗೆ ಪಡೆದಿರುವ ವ್ಯಕ್ತಿಗಳು ನಿಗದಿತ ಸಮಯದೊಳಗೆ ದುರಸ್ತಿ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ರೈತರ ಜಮೀನುಗಳ ಪಕ್ಕದಲ್ಲಿ ಪೈಪ್ ಅಳವಡಿಸಲು ಹೇಗೆಂದರೆ ಹಾಗೆ ನೆಲ ಅಗೆಯಲಾಗಿದೆ. ಸಮರ್ಪಕವಾಗಿ ಮುಚ್ಚದ ಪರಿಣಾಮವಾಗಿ ರೈತರು ಕಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು.
ಬಗರ್ ಹುಕುಂ ಸಾಗುವಳಿಗೆ ಸಂಬಂಧಿಸಿದಂತೆ ಶ್ರೀನಿವಾಸಪುರ ಹಾಗೂ ಕೋಲಾರ ತಹಶೀಲ್ದಾರರ ಸಭೆ ಕರೆದು ಚರ್ಚಿಸಲಾಗುವುದು. ಬಡವರ ಕೆಲಸ ನೆನೆಗುದಿಗೆ ಬೀಳದಂತೆ ಎಚ್ಚರವಹಿಸಲಾಗುವುದು. ಗ್ರಾಮೀಣ ಪ್ರದೇಶದ ರೈತರು ಹಾಗೂ ಮತ್ತಿತರ ನಾಗರಿಕರು ತಮ್ಮ ಕೆಲಸ ಮಾಡಿಸಿಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಅಲೆಯಲು ಅವಕಾಶ ನೀಡಬಾರದು ಎಂದು ಹೇಳಿದರು.
ಕ್ಷೇತ್ರಕ್ಕೆ 23 ಸಾವಿರ ಮನೆ ತರಲಾಗಿದೆ ಎಂದು ಹೇಳಲಾಗಿದೆ. ಆದರೆ ಮನೆಗಳ ವಿತರಣೆ ಕುರಿತು ಪರಿಶೀಲನೆ ನಡೆಸಿದ ಬಳಿಕ, ವಿತರಣೆಯಲ್ಲಿ ಏರುಪೇರಾಗಿದ್ದಲ್ಲಿ ಸರಿಪಡಿಸಲಾಗುವುದು. ವಸತಿ ರಹಿತರೆಲ್ಲರಿಗೂ ಮನೆ ನಿರ್ಮಿಸಿಕೊಡಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಶಿರಿನ್ ತಾಜ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸನ್, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಮಂಜುನಾಥರೆಡ್ಡಿ, ಅಧಿಕಾರಿಗಳಾದ ಶಿವಕುಮಾರ್, ನರಸಿಂಹಮೂರ್ತಿ, ಕೃಷ್ಣಪ್ಪ, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ, ಜಿ.ರಾಜಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಂಜುನಾಥರೆಡ್ಡಿ, ಮಖಂಡರಾದ ಸೇಷಾಪುರ ಗೊಪಾಲ್, ಕೃಷ್ಣಾರೆಡ್ಡಿ, ಕೆ.ಪಿ.ನಾಗೇಶ್, ರಾಮಚಂದ್ರೇಗೌಡ, ಸಿ.ರವಿ, ಮಣಿ, ಚಂಗಪ್ಪ ಇದ್ದರು

ಬೆಳೆ ವಿಮೆ ಯೋಜನೆಯಡಿ ಬೆಳೆ ಸಮೀಕ್ಷೆ, ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯಿಂದ ತಿರಸ್ಕøತಗೊಂಡ ಪ್ರಕರಣಗಳನ್ನು ಆಕ್ಷೇಪಣೆಗಳಿದ್ದಲ್ಲಿ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ

ಶ್ರೀನಿವಾಸಪುರ: 2021-22ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಯೋಜನೆಯಡಿ ಬೆಳೆ ಸಮೀಕ್ಷೆ ಮಾಹಿತಿಯೊಂದಿಗೆ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯಿಂದ ತಿರಸ್ಕøತಗೊಂಡ ಪ್ರಕರಣಗಳನ್ನು ತಾಲ್ಲೂಕಿನ ಕೃಷಿ ಇಲಾಖೆಗೆ ಸಂಬಂಧಿಸಿದ ಹೋಬಳಿ ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದ್ದು, ರೈತರಿಂದ ಆಕ್ಷೇಪಣೆಗಳಿದ್ದಲ್ಲಿ ಮೇ.31 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ ಎಂದು ತಾಲ್ಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್ ತಿಳಿದ್ದಾರೆ.
2021-22ನೇ ಸಾಲಿನ ಬೆಳೆ ನೋಂದಾವಣೆ ಮಾಡಲಾಗಿರುವ ಪಹಣಿ, ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ ಸಂಬಂಧಿಸಿದ ರಸೀದಿ, ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನ ಎಪಿಎಂಸಿ ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ಸದರಿ ದಾಖಲೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಶ್ರೀನಿವಾಸಪುರ: ಪಟ್ಟಣದ ಬೆಸ್ಕಾಂ ಕಚೇರಿಯಲ್ಲಿ ಮೇ.20 ರಂದು ಮಧ್ಯಾಹ್ನ 3 ಗಂಟೆಗೆ ವಿದ್ಯುತ್ ಗ್ರಾಹಕರ ಸಂವಾದ ಸಭೆ

ಶ್ರೀನಿವಾಸಪುರ: ಪಟ್ಟಣದ ಬೆಸ್ಕಾಂ ಕಚೇರಿಯಲ್ಲಿ ಮೇ.20 ರಂದು ಮಧ್ಯಾಹ್ನ 3 ಗಂಟೆಗೆ ವಿದ್ಯುತ್ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದೆ ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ ತಿಳಿಸಿದ್ದಾರೆ.
ವಿದ್ಯುತ್ ಇಲಾಖೆಗೆ ಸಂಬಂಧಿಸಿದ ಯಾವುದೇ ಕುಂದು ಕೊರತೆ ಇದ್ದಲ್ಲಿ ಗ್ರಾಹಕರು ನಿಗದಿತ ಸಭೆಯಲ್ಲಿ ಭಾಗವಹಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಗ್ರಾಹಕರು ಈ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.