ಗ್ರಾಮೀಣ ಪ್ರದೇಶದ ಮಹಿಳೆಯರು ಸಾಲ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಆರ್ಥಿಕಾಭಿವೃದ್ಧಿ ಸಾಧಿಸಬೇಕು : ವೈ.ಆರ್.ಶ್ರೀನಿವಾಸರೆಡ್ಡಿ

ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ಮಹಿಳೆಯರು ಸಾಲ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಆರ್ಥಿಕಾಭಿವೃದ್ಧಿ ಸಾಧಿಸಬೇಕು. ಸ್ವಾವಲಂಬಿ ಜೀವನ ಸಾಗಿಸಬೇಕು ಎಂದು ಯರ್ರಂವಾರಿಪಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಆರ್.ಶ್ರೀನಿವಾಸರೆಡ್ಡಿ ಹೇಳಿದರು.
ಗ್ರಾಮದಲ್ಲಿ ಸಂಜೀವನಿ ಒಕ್ಕೂಟದ ವತಿಯಿಂದ ಒಕ್ಕೂಟದ ಮಹಿಳಾ ಸದಸ್ಯರಿಗೆ ಶನಿವಾರ ಏರ್ಪಡಿಸಿದ್ದ ಸಾಲವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಪಡೆದ ಸಾಲ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು. ಹಾಗೆ ಮರುಪಾವತಿ ಮಾಡಿದ ಸದಸ್ಯರಿಗೆ ಮತ್ತೆ ಸಾಲ ನೀಡಲಾಗುವುದು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 70 ಸಂಜೀವಿನಿ ಒಕ್ಕೂಟಗಳಿದ್ದು, ಮೊದಲ ಹಂತದಲ್ಲಿ 15 ಒಕ್ಕೂಟಗಳಿಗೆ ರೂ.22.50 ಲಕ್ಷ ಸಾಲ ವಿತರಣೆ ಮಾಡಲಾಗುತ್ತಿದೆ. ಮುಂದಿನ ದಿಗಳಲ್ಲಿ ಉಳಿದ ಒಕ್ಕುಟಗಳಿಗೂ ಕೇಂದ್ರ ಸರ್ಕಾರದಿಂದ ಸಾಲ ವಿತರಣೆ ಮಾಡಲಾಗುವುದು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಿತಾ ರಾಮಚಂದ್ರ, ಪಿಡಿಒ ಸಂಪತ್, ಸುಧಾಕರ್, ಗೋವಿಂದಪ್ಪ ಇದ್ದರು.

ವಿದ್ಯಾರ್ಥಿಗಳು ಗುಣಾತ್ಮಕ ಫಲಿತಾಂಶ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ

ಶ್ರೀನಿವಾಸಪುರ: ವಿದ್ಯಾರ್ಥಿಗಳು ಗುಣಾತ್ಮಕ ಫಲಿತಾಂಶ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಹೇಳಿದರು.
ಪಟ್ಟಣದ ಹೊರವಲಯದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ 8,9,10ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ, ಗಣಿತ ಹಾಗೂ ಇಂಗ್ಲೀಷ್ ವಿಷಯಗಳ ಬುನಾದಿ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು. ಅನಗತ್ಯವಾಗಿ ಮೊಬೈಲ್ ಬಳಸುವುದರಿಂದ ಅಮೂಲ್ಯವಾದ ಸಮಯ ವ್ಯರ್ಥವಾಗುತ್ತದೆ. ಕೆಲವೊಮ್ಮೆ ಮಕ್ಕಳು ಶಿಕ್ಷಣದಿಂದ ದೂರ ಸರಿಯುವ ಅಪಾಯವೂ ಇರುತ್ತದೆ. ಪೋಷಕರು ಈ ವಿಷಯದಲ್ಲಿ ಎಚ್ಚರ ವಹಿಸಬೇಕು. ಮಕ್ಕಳು ಸರಿಯಾದ ದಾರಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು. ಸಾಧನೆಗೆ ಪೂರಕವಾದ ಸಾಮಥ್ರ್ಯ ಗಳಿಸುವಲ್ಲಿ ಸಹಕರಿಸಬೇಕು ಎಂದು ಹೇಳಿದರು.
ಆದಾಯ ತೆರಿಗೆ ಇಲಾಖೆ ಸಹಾಯಕ ಕಮೀಷನರ್ ಕೆ.ಚಂದ್ರಕಳ ನಾರಾಯಣ ಮಾತನಾಡಿ, ಹೆಣ್ಣು ಮಕ್ಕಳು ಶೈಕ್ಷಣಿಕವಾಗಿ ಮುಂದೆ ಬರಬೇಕು. ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಸಾಧನೆ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಿ.ಚೆನ್ನಬಸಪ್ಪ, ಜಿಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿ ಅಧಿಕಾರಿ ಸೌಮ್ಯ ವರ್ಣಿಕರ್, ಡಿವೈಎಸ್‍ಪಿ ಜಯಶಂಕರ್, ಪೊಲೀಸ್ ಇನ್ಸ್‍ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ, ಪ್ರಾಂಶುಪಾಲ ಆರ್.ವಿ.ಚಂದ್ರು, ಕೆ.ನರಸಿಂಹಮೂರ್ತಿ, ಶಿಕ್ಷಕ ಸುಬ್ರಮಣಿ ಇದ್ದರು.