

ಕೋಲಾರ,ಅ.07: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತನ್ನ ಸದಸ್ಯರ ಕ್ಷೇಮಾಭಿವೃದ್ಧಿಗಾಗಿ ಸ್ಥಾಪಿಸಿರುವ ಪತ್ರಕರ್ತರ ಕಲ್ಯಾಣ ನಿಧಿಗೆ ಕರ್ನಾಟಕ ಸರ್ಕಾರವು 25 ಲಕ್ಷ ರೂ ಅನುದಾನ ಬಿಡುಗಡೆ ಮಾಡಿ ನವಂಬರ್ 7 ರಂದು ಅಧಿಕೃತ ಆದೇಶ ಹೊರಡಿಸಿದೆ.
ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2022 ರಲ್ಲಿ ಬಿ.ವಿ.ಗೋಪಿನಾಥ್ ಅಧ್ಯಕ್ಷರಾದ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಪತ್ರಕರ್ತರ ಆಪತ್ಕಾಲಕ್ಕೆ ನೆರವಾಗುವ ಸಲುವಾಗಿ 1 ಕೋಟಿ ರೂಗಳ ಕ್ಷೇಮಾಭಿವೃದ್ಧಿ ನಿಧಿಯನ್ನು ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಪ್ರಕಟಿಸಿದ್ದರು.
ಇದುವರೆಗೂ ಸಂಘವು ಉದ್ಯಮಿ ಅಬ್ದುಲ್ ಸುಭಾನ್, ಕೆಲವು ಸದಸ್ಯರ ವೈಯಕ್ತಿಕ ನೆರವು ಮತ್ತು ಸ್ವಂತ ಸಂಪನ್ಮೂಲದಿಂದ ಒಟ್ಟು 3,31,055 ಲಕ್ಷ ರೂಗಳನ್ನು ಸಂಗ್ರಹಿಸಿ ಕಲ್ಯಾಣ ನಿಧಿಯ ಹೆಸರಿನಲ್ಲಿ ಬ್ಯಾಂಕಿನಲ್ಲಿ ಠೇವಣಿ ಇರಿಸಿದೆ.
ಈ ನಡುವೆ 2023ರ ಜುಲೈ 1 ರಂದು ನಡೆದ ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹಾಗೂ ಕೋಲಾರದ ಹೆಮ್ಮೆಯ ಹುಡುಗ ಕೆ.ವಿ. ಪ್ರಭಾಕರ್ ಅವರಿಗೆ ಪತ್ರಕರ್ತರ ಕಲ್ಯಾಣನಿಧಿಗಾಗಿ ಸರ್ಕಾರದಿಂದ 50 ಲಕ್ಷ ರೂ ಮಂಜೂರು ಮಾಡಿಸುವಂತೆ ಮನವಿ ಸಲ್ಲಿಸಿತು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೆ.ವಿ.ಪ್ರಭಾಕರ್ ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ 25 ಲಕ್ಷ ಅನುದಾನ ಮಂಜೂರು ಮಾಡಿಸಿದರು.

