

ಕೋಲಾರ : ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಇದೇ 22 ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿದ್ದು, ಕೋಲಾರ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಅಂಗವಾಗಿ ವಾಕಥಾನ್ ಹಮ್ಮಿಕೊಳ್ಳಲಾಗಿತ್ತು.
ವಾಕಥಾನ್ಗೆ ಕೋಲಾರ ಜಿಲ್ಲಾ ಶಾಸಕರಾದ ಡಾ. ಕೊತ್ತೂರು ಜಿ.ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಚಾಲನೆ ನೀಡಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು, ಜಿಲ್ಲೆಯಲ್ಲಿ 4 ಲಕ್ಷದ 17 ಸಾವಿರ ಮನೆಗಳಿದ್ದು, ಸಮೀಕ್ಷೆಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಸ್ಕಾಂ ವತಿಯಿಂದ ಮನೆಗಳಿಗೆ ಸ್ಟಿಕರ್ ಅಂಟಿಸಲಾಗಿದೆ. ಆರೋಗ್ಯ ಇಲಾಖೆಯ ಆಶಾಕಾರ್ಯಕರ್ತೆಯರು, ನಗರಸಭೆಯ ಅಧಿಕಾರಿಗಳು ಪ್ರತಿ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆಗೆ ಸಂಬಂಧಪಟ್ಟ ದಾಖಲೆಗಳು ಹಾಗೂ ಪ್ರಶ್ನೆಯ ನಮೂನೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ ಎಂದರು.
ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂದು ಬೆಳಿಗ್ಗೆ 9.30 ರಿಂದ ವಾಕಥಾನ್ ಹಮ್ಮಿಕೊಂಡಿದ್ದು, ಸಮೀಕ್ಷೆಯಲ್ಲಿ ಪ್ರತಿಯೊಂದು ಕುಟುಂಬವೂ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಪ್ರತಿ ಮನೆಗಳಿಗೆ ಸಮೀಕ್ಷೆದಾರರು ತೆರಳಲಿದ್ದು, 60 ಪ್ರಶ್ನೆಗಳುಳ್ಳ ನಮೂನೆಯಲ್ಲಿ ವೈಯುಕ್ತಿಕ ಮತ್ತು ಕೌಟುಂಬಿಕ ವಿಚಾರಗಳನ್ನು ಕಲೆಹಾಕಲಿದ್ದಾರೆ. ಆಧಾರ್ ಕಾರ್ಡ್ ಮುಖ್ಯವಾಗಿದ್ದು. ಆಧಾರ್ ಕಾರ್ಡ್ ಗೆ ನೋಂದಾಯಿಸಿರುವ ಪೋನ್ ನಂಬರ್ ಗೆ ಒಟಿಪಿ ಬರಲಿದೆ. ನಂತರ ಮಾಹಿತಿಯನ್ನು ಕಲೆಹಾಕಲಿದ್ದಾರೆ.ಈ ಸಮೀಕ್ಷೆ ಸರ್ವರ ಸಮೀಕ್ಷೆಯಾಗಿದೆ ಎಂದರು.
ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಖುದ್ದಾಗಿ ಕರಪತ್ರ ಹಂಚುವ ಮೂಲಕ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ಡಾ.ಪ್ರವೀಣ್ ಪಿ.ಬಾಗೇವಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ಮಂಗಳ, ಉಪವಿಭಾಗಾಧಿಕಾರಿ ಡಾ. ಮೈತ್ರಿ, ತಹಶೀಲ್ದಾರ್ ಡಾ.ನಯನ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೀತಮ್ಮ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ರಮೇಶ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಶ್ರೀನಿವಾಸನ್, ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಅಧಿಕಾರಿ ಶಿವಕುಮಾರ್, ನಗರಸಭೆ ಅಧ್ಯಕ್ಷರು ಲಕ್ಷ್ಮೀದೇವಮ್ಮ ರಮೇಶ್, ತಾಲ್ಲೂಕು ಕಾರ್ಯನಿರ್ವಾಹಕಾಧಿಕಾರಿ ಮಂಜುನಾಥ್, ವೆಂಕಟಚಲಪತಿ ಸೇರಿದಂತೆ ಹಲವಾರು ಜಿಲ್ಲಾ ಮಟ್ಟದ ಅಧಿಕಾರಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.

