

ಕೋಲಾರ : ಜಿಲ್ಲೆಯ ಎಲ್ಲಾ ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಎಸ್ಎಫ್ಸಿ (State Finance Commission) ಮುಕ್ತ ನಿಧಿ 7.25 ಯೋಜನೆ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯಾರ್ಥಿ ವೇತನ ನೀಡುವಂತೆ ಮನವಿ ಮಾಡಲಾಗಿದೆ.
ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಜಿಲ್ಲಾ ಸಮಿತಿಯ ಸದಸ್ಯ ಶಬ್ಬೀರ್ ಅಹ್ಮದ್ ಪಾಷಾ ಅವರು ಈ ಕುರಿತು ಪ್ರತಿಕ್ರಿಯೆ ನೀಡುತ್ತಾ, “ಈ ಯೋಜನೆಯಡಿ ಲಭ್ಯವಾಗುವ ನಿಧಿಯನ್ನು ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕಾಗಿ ಬಳಸುವುದು ಅಗತ್ಯ. ಹೆಚ್ಚಿನ ಅಂಕಗಳನ್ನು ಗಳಿಸಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದರೆ ಅವರು ಉನ್ನತ ಶಿಕ್ಷಣವನ್ನು ಸುಗಮವಾಗಿ ಮುಂದುವರಿಸಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.
ಅವರು ಮುಂದುವರಿದು, “ಜಿಲ್ಲಾದಾದ್ಯಂತ ಅನೇಕ ಬಡ ಕುಟುಂಬಗಳ ಮಕ್ಕಳು ಆರ್ಥಿಕ ಸಂಕಷ್ಟದಿಂದ ವಿದ್ಯಾಭ್ಯಾಸ ಬಿಟ್ಟುಬಿಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳು ಎಸ್ಎಫ್ಸಿ ನಿಧಿಯಲ್ಲಿ ನಿರ್ದಿಷ್ಟ ಶೇಕಡಾವಾರು ಮೊತ್ತವನ್ನು ಮೀಸಲಿಟ್ಟು ವಿದ್ಯಾರ್ಥಿ ವೇತನ ನೀಡಿದರೆ ನೂರಾರು ವಿದ್ಯಾರ್ಥಿಗಳಿಗೆ ನೇರ ಪ್ರಯೋಜನವಾಗಲಿದೆ. ಇದು ಶಿಕ್ಷಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಪ್ರಗತಿಗೆ ದಾರಿ ಮಾಡಿಕೊಡುತ್ತದೆ” ಎಂದು ತಿಳಿಸಿದರು.

