ನೋಡಲ್ ಅಧಿಕಾರಿಗಳು ಕ್ಷೇತ್ರ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಕುರಿತು ವಾಸ್ತವ ಪರಿಶೀಲಿಸಿ – ಸಿ. ಸತ್ಯಭಾಮ

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

 

 

ನೋಡಲ್ ಅಧಿಕಾರಿಗಳು ಕ್ಷೇತ್ರ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಕುರಿತು ವಾಸ್ತವ ಪರಿಶೀಲಿಸಿ – ಸಿ. ಸತ್ಯಭಾಮ

 

 

 

 

ಕೋಲಾರ ; ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಈ ಅಧಿಕಾರಿಗಳು ಕ್ಷೇತ್ರ ಭೇಟಿ ನೀಡಿ ಅಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆಯೇ ಎಂಬ ವಾಸ್ತವವನ್ನು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ತಿಳಿಸಿದರು.

ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬರ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುಡಿಯುವ ನೀರು ಅವಶ್ಯಕತೆ ಇರುವ ಕಡೆಗೆ ನೀರು ನೀಡಲು ಯಾವುದೇ ಅಭ್ಯಂತರವಿಲ್ಲ. ಆದರೆ ಇದು ದುರ್ಬಳಕೆ ಆಗಬಾರದು ಆದ್ದರಿಂದ ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಟ್ಯಾಂಕರ್ ಮತ್ತು ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ವಾಸ್ತವವನ್ನು ಪರಿಶೀಲಿಸಬೇಕು. ಇದರಿಂದ ಅವಶ್ಯಕತೆ ಇರುವವರಿಗೆ ನೀರು ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು ಖಾಸಗಿ ಬೋರ್‍ವೆಲ್ ಮತ್ತು ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಸಂಖ್ಯೆ ಕಡಿಮೆ ಆಗಬೇಕು. ಆದರೆ ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಸಂಖ್ಯೆ ಹೆಚ್ಚಾಗಿದೆ. ಬೋರ್‍ವೆಲ್‍ಗಳ ಬಳಿ ರೀಚಾರ್ಜ್ ಫಿಟ್‍ಗಳನ್ನು ನರೇಗಾ ಯೋಜನೆಯಡಿ ಕೈಗೊಂಡು ಬೋರ್‍ವೆಲ್‍ಗಳ ರೀಚಾರ್ಜ್ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿಗಳಿಗೆ ಸೂಚಿಸಿದರು.

ನಗರ ಪ್ರದೇಶಗಳಲ್ಲಿ ಪ್ರಭಾವಿ ವ್ಯಕ್ತಿಗಳ ಮನೆಗೆ ಹೆಚ್ಚಿನ ನೀರು ಜನ ಸಾಮಾನ್ಯರ ಮನೆಗೆ ಕಡಿಮೆ ನೀರು ನೀಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು. ನೀರು ಅವಶ್ಯಕತೆ ಇರುವ ಎಲ್ಲರಿಗೂ ಸಮಾನವಾಗಿ ನೀರನ್ನು ಒದಗಿಸಬೇಕು. ಈ ಬಾರಿ 1.5 ಕೋಟಿ ವೆಚ್ಚದಲ್ಲಿ ಬೋರ್‍ವೆಲ್‍ಗಳ ರೀಡ್ರಿಲ್‍ಗೆ ಅನುಮೋದನೆ ನೀಡಲಾಗುವುದು. ಉಳಿದ ಬೋರ್‍ವೆಲ್‍ಗಳ ರೀಡ್ರಿಲ್‍ಗೆ ಇತರೆ ಸಂಬಂಧಿಸಿದ ಇಲಾಖೆಗಳ ಅನುದಾನವನ್ನು ಬಳಕೆ ಮಾಡಿಕೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಸ್ವಾಮಿ, ಸೇರಿದಂತೆ ನೋಡಲ್ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರು ಉಪಸ್ಥಿತರಿದ್ದರು.