ಶ್ರೀನಿವಾಸಪುರ: ಸೌಲಭ್ಯ ವಿತರಣೆಯಲ್ಲಿ ಮಧ್ಯವರ್ತಿಗಳು ತಲೆ ಹಾಕದಂತೆ ಎಚ್ಚರ ವಹಿಸಬೇಕು : ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನರೇಶ್‌

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ತಾಲ್ಲೂಕಿನ ಹೊಗಳಗೆರೆ ಗ್ರಾಮದ ಮಾವು ಅಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ  ಏರ್ಪಡಿಸಿದ್ದ ಅಭಿವೃದ್ಧಿ ಕಾರ್ಯಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ತಾಲ್ಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಆರೋಗ್ಯ ಇಲಾಖೆ ಹಾಗೂ ಸಂಬಂಧಪಟ್ಟ ಕಾರ್ಯಕರ್ತರು ಹೆಚ್ಚು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.  ತಾಲ್ಲೂಕಿನಲ್ಲಿ ಈ ವರೆಗೆ 111 ಕೊರೊನಾ ಪ್ರಕರನಗಳು ವರದಿಯಾಗಿದ್ದು, 5 ಮಂದಿ ಅಸುನೀಗಿದ್ದಾರೆ. 39 ಮಂದಿ ಗುಣಮುಖರಾಗಿದ್ದಾರೆ. ಗಂಗರಗಾನಹಳ್ಳಿ ಗ್ರಾಮದ ಏಕಲವ್ಯ ಶಾಲೆ ಹಾಗೂ ಚಲ್ದಿಗಾನಹಳ್ಳಿ ಗ್ರಾಮದ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರೆಂಟೈನ್‌ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.  ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌ ಮಾತನಾಡಿ, ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಪ್ರಸಕ್ತ ಸಾಲಿನಲ್ಲಿ ರೂ.1.5 ಕೋಟಿ ಅನುದಾನ ಬಿಡುಗಡೆಯಾಗಿದೆ. ರೂ.65 ಲಕ್ಷ ಮೀಸಲು ಹಣವಿದೆ. ಉಳಿದ ರೂ.85 ಲಕ್ಷಕ್ಕೆ ಕ್ರಿಯಾ ಯೋಜನೆ ರೂಪಿಸಬೇಕಾಗಿದೆ. ತಾಲ್ಲೂಕಿನಲ್ಲಿ ಕುಡಿಯುವ ನೀರು ಪೂರೈಕೆ, ಶಾಲಾ ಕಟ್ಟಡಗಳ ನಿರ್ಮಾಣ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನ ವಾಸಿಸುವ ಕಾಲೋನಿಗಳಲ್ಲಿ ನೀರಿನ ತೊಟ್ಟಿಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.   ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಬಾಲಾವತಿ, ಸ್ಥಾನೀಯ ಸಮಿತಿ ಅಧ್ಯಕ್ಷ ಆರ್‌.ಜಿ.ನರಸಿಂಹಯ್ಯ, ಸಹಾಯಕ ನಿರ್ದೇಶಕ ರಾಮಪ್ಪ, ವ್ಯವಸ್ಥಾಪಕ ಆರ್‌.ಎನ್‌.ಸುರೇಶ ಬಾಬು ಇದ್ದರು.