ಕುಂದಾಪುರ ಸೈಂಟ್ ಮೇರಿಸ್ ವಿದ್ಯಾಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

ಕುಂದಾಪುರ : ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿಯಿಂದ ಉತ್ಸಾಹದಲ್ಲಿ ಕ್ರೀಡೆಯಲ್ಲಿ ಭಾಗವಹಿಸಬೇಕು. ಜೀವನದಲ್ಲಿ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ತುಂಬಾ ಸಹಕಾರಿ. ಸ್ಪರ್ಧೆಯಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಕುಂದಾಪುರ ಹೋಲಿ ರೋಜರಿ ಚರ್ಚ್ ಉಪಾಧ್ಯಕ್ಷ, ನಿವೃತ್ತ ಮುಖ್ಯ ಶಿಕ್ಷಕ ಲೂಯಿಸ್ ಜೆ.ಫೆರ್ನಾಂಡೀಸ್ ಹೇಳಿದರು.
ಅವರು ಕುಂದಾಪುರ ಗಾಂಧಿ ಮೈದಾನದಲ್ಲಿ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಪಥಸಂಚಲನೆಯ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.
ಶಾಲಾ ಸಂಚಾಲಕರೂ,ಕುಂದಾಪುರ ವಲಯದ ಪ್ರಧಾನ ಧರ್ಮಗುರು ವಂ.ಫಾ.ಸ್ಟ್ಯಾನಿ ತಾವ್ರೊ ಸಮಾರಂಭದ ಅಧ್ಯಕ್ಷತೆ ವಹಿಸಿ ಕ್ರೀಡಾಧ್ವಜ ಅರಳಿಸಿ ಮಾತನಾಡಿದರು. ಸ್ವೀಕರಿಸಿದರು. ಕುಂದಾಪುರ ಸಿಟಿ ಜೆಸಿಐ ಅಧ್ಯಕ್ಷೆ ಡಾ.ಸೋನಿ ಕ್ರೀಡಾಕೂಟ ಉದ್ಘಾಟಿಸಿದರು. ಕುಂದಾಪುರ ಹೋಲಿ ರೋಜರಿ ಚರ್ಚ್‍ನ ಸಹಾಯಕ ಧರ್ಮಗುರು ಫಾ.ಅಶ್ವಿನ್, ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಾಗರ್ ಕ್ರೀಡಾ ಜ್ಯೋತಿಯನ್ನು ಬೆಳೆಗಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೂಹ ಸಂಪನ್ಮೂಲ ಅಧಿಕಾರಿ ಶಂಕರ್ ಶೆಟ್ಟಿ,ಸೈಂಟ್ ಮೇರಿಸ್ ಪ್ರೌಢಶಾಲಾ ಆಡಳಿತ ಮಂಡಳಿಯ ಸದಸ್ಯೆ ಶಾಲೆಟ್ ರೆಬೆಲ್ಲೋ, ಸೈಂಟ್ ಮೇರಿಸ್ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಡೊರೊತಿ ಸುವಾರಿಸ್, ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ತೆರೇಜಾ ಶಾಂತಿ, ಹೋಲಿ ರೋಜರಿ ಕಿಂಡರ್ ಗಾಟೀನ್ ಮುಖ್ಯ ಶಿಕ್ಷಕಿ ಶೈಲಾ ಲೂಯಿಸ್, ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಜೋನಿಟಾ ಮೆಂಡೊನ್ಸಾಪ್ರತಿಜ್ಞಾವಿಧಿ ಭೋದಿಸಿದನು.
ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರೇಷ್ಮಾ ಫೆರ್ನಾಂಡೀಸ್ ಸ್ವಾಗತಿಸಿದರು. ಸೈಂಟ್ ಮೇರಿಸ್ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ ವಂದಿಸಿದರು. ಶಿಕ್ಷಕರಾದ ಚಂದ್ರಶೇಖರ ಬೀಜಾಡಿ,ನಾಗರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.