ಮತದಾರರು ತಪ್ಪದೆ ಮತದಾನ ಮಾಡಬೇಕು. ಅತ್ಯಮೂಲ್ಯವಾದ ಮತ ವ್ಯರ್ಥವಾಗಲು ಬಿಡಬಾರದು:ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ

ಶ್ರೀನಿವಾಸಪುರ: ಮತದಾರರು ತಪ್ಪದೆ ಮತದಾನ ಮಾಡಬೇಕು. ಅತ್ಯಮೂಲ್ಯವಾದ ಮತ ವ್ಯರ್ಥವಾಗಲು ಬಿಡಬಾರದು ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು.
ಪಟ್ಟಣದಲ್ಲಿ ಪುರಸಭೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಮತದಾರರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾಗೃತ ಮತದಾರರಿಂದ ಮಾತ್ರ ಉತ್ತಮ ಅಭ್ಯರ್ಥಿ ಆಯ್ಕೆ ಸಾಧ್ಯವಾಗುತ್ತದೆ ಎಂದು ಹೇಳಿದರು.
ಚುನಾವಣಾ ಆಯೋಗ ಮತದಾನಕ್ಕೆ ಅಗತ್ಯವಾದ ಎಲ್ಲ ಸಿದ್ಧತೆ ಮಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿ ಮತದಾರನೂ ಮತ ಚಲಾಯಿಸಿದಾಗ ಮಾತ್ರ ವ್ಯವಸ್ಥೆ ಘನತೆ ಹೆಚ್ಚುತ್ತದೆ. ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಈ ಹಬ್ಬದಲ್ಲಿ ಮತದಾರರು ಹುರುಪಿನಿಂದ ಭಾಗವಹಿಸಬೇಕು ಎಂದು ಹೇಳಿದರು.
ಪುರಸಭೆ ಸಿಬ್ಬಂದಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಜನರಲ್ಲಿ ಮತದಾನ ಕುರಿತು ಅರಿವು ಮೂಡಿಸಿದರು.
ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ಕಂದಾಯ ಅಧಿಕಾರಿ ಎನ್.ಶಂಕರ್ ಇದ್ದರು.