ಶ್ರೀನಿವಾಸಪುರ: ತಾಲ್ಲೂಕಿನ ಶೀಗಹಳ್ಳಿ ಗ್ರಾಮದ ಮಾವಿನ ತೋಟವೊಂದರಲ್ಲಿ ಬಂದೂಕಿನಿಂದ ಹಾರಿದ ಗುಂಡಿಗೆ ವ್ಯಕ್ತಿಯೊಬ್ಬ ಬಲಿ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ಶೀಗಹಳ್ಳಿ ಗ್ರಾಮದ ಮಾವಿನ ತೋಟವೊಂದರಲ್ಲಿ ಬಂದೂಕಿನಿಂದ ಹಾರಿದ ಗುಂಡಿಗೆ ವ್ಯಕ್ತಿಯೊಬ್ಬ ಬಲಿಯಾಗಿರುವ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಯಲ್ದೂರು ಗ್ರಾಮದ ಶಂಕರಪ್ಪ (35) ಎಂದು ಗುರುತಿಸಲಾಗಿದೆ.
ಶಂಕರಪ್ಪ ಮಾವಿನ ತೋಟಗಳ ಕಾವಲುಗಾರನಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ ರಾತ್ರಿ ಸುಮಾರು 8 ಗಂಟೆಯಲ್ಲಿ, ಅವರು ತಮ್ಮ ಸಹಚರರಾದ ಕೋದಂಡಪ್ಪ, ಚೌಡಪ್ಪ ಹಾಗೂ ಶ್ರೀನಿವಾಸ್ ಅವರೊಂದಿಗೆ ಬಂದೂಕು ಹಿಡಿದು ಬೇಟೆಗೆ ಹೋಗಿದ್ದರು. ಬೆಳಿಗ್ಗೆ ಗ್ರಾಮದ ಹೊರವಲಯದಲ್ಲಿನ ಪೂಜಾರಿ ಯಲ್ಲಪ್ಪ ಅವರ ಮಾವಿನ ತೊಟದಲ್ಲಿ ಗುಂಟೇಟು ತಗುಲಿ ಬಂದೂಕಿನೊಂದಿಗೆ ಶವವಾಗಿ ಬಿದ್ದಿದ್ದರು. ಸಹಚರರು ತಲೆ ಮರೆಸಿಕೊಂಡಿದ್ದಾರೆ ಎಂದು ಮೃತನ ಪತ್ನಿ ಕವಿತಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮವಾಗಿ ಹಣೆಗೆ ಗಾಯವಾಗಿ ಶಂಕರಪ್ಪ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು, ಹೆಚ್ಚುವರಿ ವರಿಷ್ಠಾಧಿಕಾರಿ ನಾರಾಯಣಸ್ವಾಮಿ, ಡಿವೈಎಸ್‍ಪಿ ಗಿರಿ, ಪೊಲೀಸ್ ಇನ್ಸ್‍ಪೆಕ್ಟರ್ ಸಿ.ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು