ನೀಲಟೂರು ಗ್ರಾಮದಲ್ಲಿ ಶನಿವಾರ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ

ಶ್ರೀನಿವಾಸಪುರ: ತಾಲ್ಲೂಕಿನ ನೀಲಟೂರು ಗ್ರಾಮದಲ್ಲಿ ಶನಿವಾರ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಪ್ರಸಾದ್ (33) ಕೊಲೆಯಾದ ಯುವಕ.
ಪ್ರಸಾದ್ ಮತ್ತು ಕಿರಣ್ ಕುಟುಂಬದ ಮಧ್ಯೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಾವಿನ ಕಾಯಿ ಕೀಳುವ ವಿಚಾರದಲ್ಲಿ ಜಗಳವಾಗಿದೆ. ಕಿರಣ್, ಪ್ರಸಾದ್ ಮುಖಕ್ಕೆ ಕಾರದ ಪುಡಿ ಎರಚಿ ಕಬ್ಬಿಣದ ರಾಡ್ ಮತ್ತು ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಪ್ರಸಾದ್ ಅವರನ್ನು ಆಂಬುಲೆನ್ಸ್‍ನಲ್ಲಿ ಕೋಲಾರದ ಜಾಲಪ್ಪ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟರು ಎಂದು ಹೇಳಲಾಗಿದೆ.
ಆರೋಪಿ ಕಿರಣ್ ಶ್ರೀನಿವಾಸಪುರ ಪೊಲೀಸರಿಗೆ ಶರಣಾಗಿದ್ದು, ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನೀಲಟೂರಿನಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.