

ಶ್ರೀನಿವಾಸಪುರ; ಕ್ಷೇತ್ರದ ಸರ್ವತೋಮುಖ ಪ್ರಗತಿ ನನ್ನ ಗುರಿಯಾಗಿದೆ ಎಂದು ಜೆಡಿಎಸ್ ವಿಜೇತ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಮಂಗಳವಾರ ಜೆಡಿಎಸ್ ಕಾರ್ಯಕರ್ತರು ಏರ್ಪಡಿಸಿದ್ದ ವಿಜಯೋತ್ಸವದಲ್ಲಿ ಭಾಗವಹಿಸಿದ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಸರ್ಕಾರ ಇದ್ದರೂ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ತರುವ ಶಕ್ತಿ ನನಗಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ನೀಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ಕೃಷಿ ಕೊಳವೆ ಬಾವಿ ನಿರ್ಮಿಸಿಕೊಳ್ಳಲು ಅನುಕೂಲ ಕಲ್ಪಿಸಲಾಗುವುದು. ಕ್ಷೇತ್ರದಾದ್ಯಂತ ಪರಿಶೀಲನೆ ನಡೆಸಿ ಮನೆ ಇಲ್ಲದವರಿಗೆ ಮನೆ ನಿರ್ಮಿಸಿಕೊಡಲಾಗುವುದು ಎಂದು ಹೇಳಿದರು.
ತಾಲ್ಲೂಕಿನಲ್ಲಿ ಅಗತ್ಯ ಇರುವ ಕಡೆಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪದವಿ ಪೂರ್ವ ಕಾಲೇಜು ಸ್ಥಾಪಿಸಲಾಗುವುದು. ಪ್ರತಿ ಗ್ರಾಮಕ್ಕೂ ಕುಡಿಯುವ ನೀರು ಸರಬರಾಜು ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು. ನನಗೆ ಮತ ನೀಡಿ ಗೆಲ್ಲಿಸಿದ ಮತದಾರರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ಪ್ರತಿ ಹಂತದಲ್ಲೂ ಪಕ್ಷಾತೀತವಾಗಿ ಹಾಗೂ ಪಾರದರ್ಶಕವಾಗಿ ನಡೆದುಕೊಳ್ಳುತ್ತೇನೆ. ನನ್ನ ಗೆಲುವಿಗೆ ಕಾರಣರಾದ ಎಲ್ಲರರಿಗೂ ಕೃತಜ್ಞನಾಗಿದ್ದೇನೆ ಎಂದು ಹೇಳಿದರು.
ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ ಜಿ.ಕೆ.ವೆಂಕಟಶಿವಾರೆಡ್ಡಿ ಅವರು ಕ್ಷೇತ್ರದ ಅಭಿವೃದ್ಧಿ ಕುರಿತು ಹೊಂದಿರುವ ಯೋಜನೆ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಗ್ರಾಮದ ಮುಖ್ಯ ರಸ್ತೆಗಳಲ್ಲಿ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ರೋಡ್ ಶೋ ನಡೆಸಿ ಸಂಭ್ರಮಿಸಿದರು.
ಮುಖಂಡರಾದ ಶೇಷಾಪುರ ಗೋಪಾಲ್, ಕೆ.ಬಿ.ರಘುನಾಥ್ ರೆಡ್ಡಿ,ಎಂ.ವಿ.ಮಂಜುನಾಥ್,ಶ್ರೀನಿವಾಸ್,ಬಾಬು ರವಿಕುಮಾರ್, ಶ್ರೀನಿವಾಸಪ್ಪ, ಜಯಾಜ್ ಖಾನ್, ಅಬ್ದುಲ್, ಅಮ್ಜದ್, ಚಾನ್ಪಾಷ, ಸರ್ದಾರ್, ಫಯಾಜ್ ಖಾನ್, ಇಂತಿಯಾಜ್, ಪ್ರಸನ್ನ, ಮನು ದುರ್ಗಾಪ್ರಸಾದ್ ಇದ್ದರು.

































































