

ಶ್ರೀನಿವಾಸಪುರ, ಏಪ್ರಿಲ್ 14: ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಸಮಾಜಕ್ಕೆ ಸೀಮಿತ ವ್ಯಕ್ತಿಯಲ್ಲ; ಎಲ್ಲಾ ಸಮುದಾಯಗಳಿಗೆ ಸಂವಿಧಾನದ ಮೂಲಕ ನ್ಯಾಯ ಒದಗಿಸಿದ ಮಹಾನ್ ವ್ಯಕ್ತಿ ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ನಡೆದ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರ ಆದರ್ಶಗಳನ್ನು ಯಾವುದೇ ಸರ್ಕಾರವಾಗಲಿ ಪಾಲಿಸಬೇಕು. ಸಮಾಜದ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರಕಿಸುವುದು ಅವರ ಪ್ರಮುಖ ಧ್ಯೇಯವಾಗಿತ್ತು ಎಂದು ಹೇಳಿದರು.
ತಹಶೀಲ್ದಾರ್ ಕಚೇರಿ ಆವರಣದಲ್ಲಿ ಇರುವ ಹಳೆಯ ಕಟ್ಟಡವನ್ನು ತೆರವುಗೊಳಿಸಿ ಹೊಸ ಕಚೇರಿ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಈಗಾಗಲೇ ₹2 ಕೋಟಿ ಅನುದಾನ ಲಭ್ಯವಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ಇನ್ನಷ್ಟು ₹2 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಲಾಗಿದೆ. ಮುಂದಿನ ಒಂದು ತಿಂಗಳಲ್ಲಿ ಅನುದಾನ ಸಿಗುವ ನಿರೀಕ್ಷೆಯಿದ್ದು, ಒಂದು ವರ್ಷದೊಳಗೆ ಭವನ ಉದ್ಘಾಟನೆ ಮಾಡುವ ಗುರಿ ಇಡಲಾಗಿದೆ ಎಂದು ಮಾಹಿತಿ ನೀಡಿದರು.
ಕ್ಷೇತ್ರದಲ್ಲಿ ಅನೇಕ ಬಡ ಕುಟುಂಬಗಳಿದ್ದು, ಅವರಿಗೆ ಸಾಧ್ಯವಾದ ಮಟ್ಟಿಗೆ ಸಹಾಯ ಮಾಡಲಾಗುತ್ತಿದೆ. ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸಲು ಕೈಗಾರಿಕಾ ವಲಯ ಸ್ಥಾಪನೆಗೂ ಯೋಜನೆ ರೂಪಿಸಲಾಗಿದೆ. ಮತದಾರರು ನೀಡಿದ ಆಶೀರ್ವಾದಕ್ಕೆ ಪ್ರತಿಯಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿರುವುದಾಗಿ ಹೇಳಿದರು.
ತಹಶೀಲ್ದಾರ್ ಜಿ.ಎನ್. ಸುದೀಂದ್ರ ಮಾತನಾಡಿ, ಅಂಬೇಡ್ಕರ್ ಅವರು ಸ್ಪರ್ಶಿಸಿದ ಪ್ರತಿಯೊಂದು ಕ್ಷೇತ್ರದಲ್ಲೂ ವಿಶಿಷ್ಟ ಕೊಡುಗೆ ನೀಡಿದ್ದಾರೆ. ಸಮಾನತೆ ಎಂಬ ಮಹತ್ವದ ತತ್ವವನ್ನು ಸಂವಿಧಾನದ ಮೂಲಕ ಜಾರಿಗೆ ತಂದವರು ಎಂದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಡಾ. ಕೆ.ಎನ್. ವೇಣುಗೋಪಾಲ್ ಮಾತನಾಡಿ, ಇಂದು ದೇಶದಲ್ಲಿ ನಾವು ಅನುಭವಿಸುತ್ತಿರುವ ಸುಖಶಾಂತಿಯ ಜೀವನಕ್ಕೆ ಅಂಬೇಡ್ಕರ್ ರಚಿಸಿದ ಸಂವಿಧಾನವೇ ಕಾರಣ. ವಿಶ್ವ ಮಟ್ಟದಲ್ಲೂ ಭಾರತದ ಸಂವಿಧಾನ ಶ್ರೇಷ್ಠವಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಡಾ. ಚಂದ್ರಕಳಾ ಶ್ರೀನಿವಾಸನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಂದ ಬಂದ ಸ್ಥಬ್ಧಚಿತ್ರಗಳೊಂದಿಗೆ ಜಾನಪದ ತಂಡಗಳ ಮೆರವಣಿಗೆ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಇಒ ಕೆ. ಸರ್ವೇಶ್, ಪುರಸಭೆ ಮುಖ್ಯಾಧಿಕಾರಿ ವಿ. ನಾಗರಾಜ್, ಬಿಇಒ ಮುನಿಲಕ್ಷ್ಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಎನ್. ರಾಜೇಶ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್, ಬಿಜೆಪಿ ಮಂಡಲ ಅಧ್ಯಕ್ಷ ರೋಣೂರು ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ನಾಗಭೂಷಣ್, ತೂಪಳ್ಳಿ ಆರ್. ನಾರಾಯಣಸ್ವಾಮಿ ಸೇರಿದಂತೆ ಅನೇಕರು ಹಾಜರಿದ್ದರು.

























