

Aಕೋಲಾರ, 30 ಜೂನ್ 2025: ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಅವರು ಮೊದಲು ತಮ್ಮ ಪಕ್ಷದ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಹೊರ ಹಾಕಲಿ. ನಂತರ ಬೇರೆಯವರ ತಟ್ಟೆಯಲ್ಲಿ ನೊಣದ ಬಗ್ಗೆ ಯೋಚನೆ ಮಾಡಲಿ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ತಿರುಗೇಟು ನೀಡಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಮೈಸೂರು ದಸರಾವನ್ನು ಹೊಸ ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ ಎಂಬ ಅಶೋಕ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಅಶೋಕ ಅವರು ಯಾವಾಗ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದರು ಎಂದು ವ್ಯಂಗ್ಯವಾಡಿದರು.
ಅಶೋಕ ಅವರ ಬಿಜೆಪಿ ಪಕ್ಷದಲ್ಲೇ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಬದಲಾವಣೆ ಮಾಡಲಾಗುತ್ತಿದೆ. ಅವರಲ್ಲಿಯೇ ಪ್ರತಿದಿನ ಫೈಟಿಂಗ್ ನಡೆಯುತ್ತಿದೆ. ಅದನ್ನು ಅಶೋಕ ಅವರು ಮೊದಲು ಬಗೆಹರಿಸಿಕೊಳ್ಳಲಿ ಎಂದು ತಾಕೀತು ಮಾಡಿದರು.
ರಾಜ್ಯದ ಜನತೆ ಕಾಂಗ್ರೆಸ್ ನ 140 ಶಾಸಕರನ್ನು ಗೆಲ್ಲಿಸಿ ಸ್ಪಷ್ಟ ಬಹುಮತ ನೀಡಿದ್ದಾರೆ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅತ್ಯುತ್ತಮವಾಗಿ ಜನಪರ ಆಡಳಿತ ನಡೆಸುತ್ತಿದೆ. ಈ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ. ಅಷ್ಟೇ ಅಲ್ಲ. 2028 ಮತ್ತು 2033 ರಲ್ಲಿಯೂ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷ ಎಂಬ ಬೇಧ ಭಾವ ಮಾಡದೇ ಎಲ್ಲರಿಗೂ ಸಮಾನವಾಗಿ ಅನುದಾನವನ್ನು ನೀಡುತ್ತಿದ್ದಾರೆ. ಈ ಮೂಲಕ ಸಮಪಾಲು – ಸಮಬಾಳು ತತ್ವವನ್ನು ಅನುಸರಿಸಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.


