


ಶ್ರೀನಿವಾಸಪುರ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಕಾರ್ಯಕ್ರಮವನ್ನು ಪಟ್ಟಣದ ಪಿಎಲ್ಡಿ ಬ್ಯಾಂಕ್ ಆವರಣದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ದೊಡ್ಡ ಪರದೆಯ ಮೂಲಕ ವೀಕ್ಷಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ವಿಧಾನಸಭಾಧ್ಯಕ್ಷ
ಕೆ.ಆರ್. ರಮೇಶ್ ಕುಮಾರ್ ಪಕ್ಷದ ಗೌರವ ಹೆಚ್ಚಾಗುವ ರೀತಿಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ ಬಳಿಕ, ಪಕ್ಷದ ಹೈಕಮಾಂಡ್ ನಾಯಕತ್ವದ ನಿರ್ಧಾರಕ್ಕೆ ಅನುಗುಣವಾಗಿ ರಾಜ್ಯದ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡಿದ್ದು ಮಾದರಿಯಾಗಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷದಲ್ಲಿ ಒಳಜಗಳ ಉಂಟಾಗಲಿದೆ ಎಂದು ವಿರೋಧ ಪಕ್ಷಗಳು ನಿರೀಕ್ಷಿಸಿದ್ದರೂ, ಆ ಕನಸು ನನಸಾಗಿಲ್ಲ ಎಂದು ತಿಳಿಸಿದರು.
ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಪಯಣವನ್ನು ಸ್ಮರಿಸಿದ ಅವರು, ಯುವ ಕಾಂಗ್ರೆಸ್ನಿಂದ ಆರಂಭಿಸಿ ಜಿಲ್ಲಾ ಪಂಚಾಯಿತಿ, ಲೋಕಸಭೆ ಚುನಾವಣೆಗಳು ಸೇರಿದಂತೆ ವಿವಿಧ ಹಂತಗಳಲ್ಲಿ ಹೋರಾಟ ನಡೆಸಿ, ಪಕ್ಷದ ಅನೇಕ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ ಇಂದು ರಾಜ್ಯದ ಅತ್ಯುನ್ನತ ಹುದ್ದೆಗೆ ಏರಿದ್ದಾರೆ ಎಂದು ಶ್ಲಾಘಿಸಿದರು.
ರಾಜ್ಯದ ಅಭಿವೃದ್ಧಿ ಹಾಗೂ ಜನಪರ ಆಡಳಿತಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಸಹಕರಿಸಬೇಕು. ಕಾಂಗ್ರೆಸ್ ಪಕ್ಷದ ತತ್ವವಾದ ಎಲ್ಲರೂ ಇದ್ದರೆ ದೇಶ ಎಂಬ ಸಂದೇಶದೊಂದಿಗೆ ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಕೆಲಸ ನಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್, ಉಪಾಧ್ಯಕ್ಷ ಕೋಡಿಪಲ್ಲಿ ಸುಬ್ಬಿರೆಡ್ಡಿ, ಕೆಪಿಸಿಸಿ ಸದಸ್ಯ ಸಂಜಯ್ ರೆಡ್ಡಿ, ಅಡ್ಡಗಲ್ ಕೋಮುಲ್ ಕ್ಷೇತ್ರದ ನಿರ್ದೇಶಕ ಕೆ.ಕೆ. ಮಂಜುನಾಥ್, ಪುರಸಭೆಯ ಮಾಜಿ ಅಧ್ಯಕ್ಷರಾದ ಬಿ.ಎಂ. ಪ್ರಕಾಶ್ ಹಾಗೂ ಬಿ.ಆರ್. ಭಾಸ್ಕರ್, ಭೂ ಮಂಜೂರಾತಿ ನಿರ್ದೇಶಕ ಸೀತಾರಾಮರೆಡ್ಡಿ, ಮುಖಂಡರಾದ ವೆಂಕಟರೆಡ್ಡಿ, ಗಾಂಡ್ಲಹಳ್ಳಿ ದರ್ಶನ್, ಹರ್ಷ, ನರಸಿಂಹಮೂರ್ತಿ, ಶಿವರಾಜ್, ಸತ್ಯನಾರಾಯಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭ ಹಾರೈಸಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.


