JANANUDI.COM NETWORK
![](https://jananudi.com/wp-content/uploads/2021/05/100-1.jpg)
ಬೆಂಗಳೂರು, ಮೇ. 14; “ನಮ್ಮ ಪಕ್ಷದ ಎಲ್ಲಾ ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ರೂ.1 ಕೋಟಿ ರೂ.ಗಳಂತೆ ಒಟ್ಟು ರೂ.100 ಕೋಟಿ ಹಣವನ್ನು ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆಗೆ ನೀಡಲು ತೀರ್ಮಾನಿಸಿದ್ದೇವೆ’ ಎಂದು ಇಂದು ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ’ನಾಡಿನ ಎಲ್ಲ ಜನರಿಗೆ ಆದಷ್ಟು ಬೇಗ ವ್ಯಾಕ್ಸಿನ್ ಸಿಗಲಿ ಎಂಬುದೆ ನಮ್ಮ ಆಶಯ. ಈ ನಿಟ್ಟಿನಲ್ಲಿ ನಾವು ಹಣ ನೀಡುತ್ತಿದ್ದೇವೆ” ಎಂದರು.
“ದೇಶದ ಪ್ರತಿಯೊಬ್ಬರಿಗೂ ಕೊರೊನಾ ವ್ಯಾಕ್ಸಿನ್ ನೀಡುವುದೇ ಸೋಂಕು ತಡೆಗಟ್ಟಲು ಇರುವ ಪರಿಣಾಮಕಾರಿ ಮಾರ್ಗವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಷ್ಟರೊಳಗೆ ಕನಿಷ್ಠ ಅರ್ಧದಷ್ಟು ಜನರಿಗೆ ವ್ಯಾಕ್ಸಿನ್ ನೀಡಿದ್ದರೆ ಕೊರೊನಾ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ಬಂದಿರುತ್ತಿತ್ತು” ಎಂದು ಅವರು ಅಭಿಪ್ರಾಯಪಟ್ಟರು,
“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೇಜವಾಬ್ದಾರಿಯಿಂದಾಗಿ ಜನ ವ್ಯಾಕ್ಸಿನ್ ಗಾಗಿ ಆಸ್ಪತ್ರೆಗಳಿಗೆ ಅಲೆಯುವ ಪರಿಸ್ಥಿತಿ ಬಂದಿದೆ. ವ್ಯಾಕ್ಸಿನ್ ಅಭಿಯಾನಕ್ಕೆ ಸಂಬಂಧ ಪಟ್ಟಂತೆ ಕರ್ನಾಟಕ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಸರ್ಕಾರಗಳಿಗೆ ಛೀಮಾರಿ ಹಾಕಿವೆ. ಇಷ್ಟಾದರೂ ಬಿಜೆಪಿ ನಾಯಕರಿಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ” ತಮ್ಮ ಆಕ್ರೋಷ ವ್ಯಕ್ತಪಡಿಸಿದರು. ರಾಜ್ಯಕ್ಕೆ ವ್ಯಾಕ್ಸಿನ್ ಬರಲು ವಿಳಂಬ ಆಗಲಿದೆಯೆಂದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೇ, ಹೇಳಿದ್ದಾರೆ. ಇನ್ನೂ ಕೆಲವೇ ದಿನಗಳಲ್ಲಿ ಕೊರೊನಾ 3ನೇ ಅಲೆ ಬರಲಿದ್ದು, ಅದರ ಬಗೆಗಿನ ತಜ್ಞರ ಅಭಿಪ್ರಾಯವನ್ನು ಗಮನಿಸಿದರೆ ಮುಂದಿನ ದಿನಗಳ ಬಗ್ಗೆ ಬಹಳ ಆತಂಕವಾಗುತ್ತದೆ” ಎಂದರು.
ವ್ಯಾಕ್ಸಿನ್ ನೀಡಿಕೆ ವಿಚಾರದಲ್ಲಿ ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ಮಾರ್ಗಸೂಚಿಗಳನ್ನು ಬದಲಾವಣೆ ಮಾಡಿಕೊಳ್ಳುತ್ತಿದೆ. ಇದೊಂದು ವೈಜ್ಞಾನಿಕ ಪ್ರಕ್ರಿಯೆ, ವ್ಯಾಕ್ಸಿನ್ ತಯಾರಿಕಾ ಹಂತದಲ್ಲಿಯೇ ಎರಡು ಡೋಸ್ ಗಳ ನಡುವಿನ ದಿನಗಳ ಅಂತರವನ್ನೂ ನಿರ್ಧರಿಸಲಾಗಿರುತ್ತದೆ, ಹಾಗಿದ್ದಾಗ ಪದೇಪದೇ ಬದಲಾವಣೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
18 ರಿಂದ 45ರ ವಯೋಮಿತಿಯ ಜನರ ವ್ಯಾಕ್ಸಿನ್ಗೆ ರಾಜ್ಯ ಸರ್ಕಾರಗಳೇ ಹಣ ಹಾಕಬೇಕು ಎಂದು ಕೇಂದ್ರ ಸರ್ಕಾರ ಹೇಳಿರುವುದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ. ಕೇಂದ್ರ ಸರ್ಕಾರವೇ ಇಡೀ ದೇಶದ ಜನತೆಗೆ ಉಚಿತವಾಗಿ ವ್ಯಾಕ್ಸಿನ್ ನೀಡಬೇಕೆಂದು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸುತ್ತೇನೆ ಎಂದರು. ಕೆ.ಪಿಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಯಲ್ಲಿದ್ದರು.