ಶ್ರೀನಿವಾಸಪುರದಲ್ಲಿ ದಾನಿಗಳ ನೆರವಿನಿಂದ ರೂ.1 ಕೋಟಿ ವೆಚ್ಚದಲ್ಲಿ ಕೋವಿಡ್ ಪರೀಕ್ಷಾ ಪ್ರಯೋಗಾಲಯ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಶ್ರೀನಿವಾಸಪುರದಲ್ಲಿ ದಾನಿಗಳ ನೆರವಿನಿಂದ ರೂ.1 ಕೋಟಿ ವೆಚ್ಚದಲ್ಲಿ ಕೋವಿಡ್ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸಲಾಗುವುದು. ಇದರಿಂದ 24 ಗಂಟೆಯೊಳಗೆ ಪರೀಕ್ಷಾ ವರದಿ ನೀಡಲು ಸಾಧ್ಯವಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಗುರುವಾರ ಕೋವಿಡ್ ನಿಯಂತ್ರಣ ಕುರಿತು ಚರ್ಚಿಸಲು ಏರ್ಪಡಿಸಿದ್ದ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದ ಕಂದಾಯ, ಆರೋಗ್ಯ, ಗ್ರಾಮ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕ್ಷೇತ್ರದ ಎಲ್ಲ ನಾಗರಿಕರಿಕರಿಗೂ ಉಚಿತವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಲಾಗುವುದು ಎಂದು ಹೇಳಿದರು.
ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕೋಲಾರ ತಾಲ್ಲೂಕಿನ ಸುಗಟೂರು ಹಾಗೂ ಹೋಳೂರು ಹೋಬಳಿಗಳ ಜನರ ಬಳಕೆಗೆ ಒಂದು ವಾರದಲ್ಲಿ ಎರಡು ಆಂಬುಲೆನ್ಸ್ ಒದಗಿಸಲಾಗುವುದು. ಟಾಸ್ಕ್ ಫೋರ್ಸ್ ಸಿಬ್ಬಂದಿ ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಿ, ಜನರಲ್ಲಿ ಕೊರೊನಾ ಬಗ್ಗೆ ಭಯ ನಿವಾರಣೆ ಮಾಡಬೇಕು. ಸೋಂಕಿತರಿಗೆ ಅಗತ್ಯವಾದ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.
ತಾಲ್ಲೂಕಿನ ಗನಿಬಂಡ ಹಾಗೂ ಚಲ್ದಿಗಾನಹಳ್ಳಿ ಗ್ರಾಮದ ಸಮೀಪ ಕೋವಿಡ್ ಕೇಂದ್ರಗಳನ್ನು ತೆರೆಯಲಾಗಿದೆ. ಮನೆಯಲ್ಲಿ ಅನುಕೂಲ ಇಲ್ಲದ ಕೋವಿಡ್ ಸೋಂಕಿತರು ಅಲ್ಲಿಗೆ ಹೋಗಿ ಅಗತ್ಯ ಚಿಕಿತ್ಸೆ ಪಡೆದುಕೊಳ್ಳಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ಸೋಂಕಿತರಿಗೆ ಅಗತ್ಯವಾದ ಔಷಧ ಹಾಗೂ ಅನುಕೂಲಗಳನ್ನು ಕಲ್ಪಿಸಬೇಕು ಎಂದು ಸಲಹೆ ಮಾಡಿದರು.
ಕೋವಿಡ್ ಹೆಸರಲ್ಲಿ ಜನರನ್ನು ಪೀಡಿಸಿ ಲಂಚ ಪಡೆಯುವ ಪೊಲೀಸ್ ಮತ್ತಿತರ ಇಲಾಖೆಗಳ ಅಧಿಕಾರಿಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಸುಮ್ಮನೆ ಕೂರುವುದಿಲ್ಲ. ಪ್ರಜಾ ಪೀಡಕ ಅಧಿಕಾರಿಗಳಿಗೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಎಚ್ಚರಿಸಿದರು.
ತಹಶೀಲ್ದಾರರಾದ ಎಸ್.ಎಂ.ಶ್ರೀನಿವಾಸ್, ಶೋಭಿತಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್.ಆನಂದ್, ರಮೇಶ್ ಬಾಬು, ತಾಲ್ಲೂಕು ವೈದ್ಯಾಧಿಕಾರಿ ಡಾ.ಎಂ.ಸಿ.ವಿಜಯ, ಆಸ್ಪತ್ರೆ ಆಡಳಿತಾಧಿಕಾರಿ ಡಾ. ಜಿ.ಎಚ್.ಶ್ರೀನಿವಾಸ್, ಪೊಲೀಸ್ ಇನ್ಸ್‍ಪೆಕ್ಟರ್ ಸಿ.ರವಿಕುಮಾರ್, ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ, ಎಂಎಸ್‍ಐಎಲ್ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ, ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಇದ್ದರು.