

ಶ್ರೀನಿವಾಸಪುರ, ಜೂ. 26: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಂಟಿ ಸಹಭಾಗಿತ್ವದಲ್ಲಿ ಜಾರಿಗೊಂಡಿರುವ ಮಾವು ಬೆಲೆ ವ್ಯತ್ಯಾಸ ಪಾವತಿ ಯೋಜನೆ (PDPS)ಯ ಲಾಭ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮಾವು ಬೆಳೆಗಾರನಿಗೂ ತಲುಪುವಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ರೈತರ ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ತೊಂದರೆ, ವಿಳಂಬ ಅಥವಾ ಲೋಪಗಳು ಉಂಟಾಗದಂತೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸರ್ಕಾರವು ಮಾವು ಬೆಳೆಗಾರರ ಹಿತದೃಷ್ಟಿಯಿಂದ ಪ್ರತಿ ಕ್ವಿಂಟಾಲ್ಗೆ ₹1,750 ಬೆಲೆ ವ್ಯತ್ಯಾಸ ಪಾವತಿಯನ್ನು ಘೋಷಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ಶುಕ್ರವಾರ ಶ್ರೀನಿವಾಸಪುರ ತಾಲ್ಲೂಕಿನ ವಿವಿಧ ಮಾವಿನ ತೋಟಗಳು ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲ್ಲೂಕಿನ ಪ್ರಮುಖ ಮಾವು ಬೆಳೆ ಪ್ರದೇಶಗಳಾದ ದಿಂಬಾಲ, ಚಾಮಪಲ್ಲಿ ಸೇರಿದಂತೆ ವಿವಿಧ ಗ್ರಾಮಗಳ ತೋಟಗಳಿಗೆ ಭೇಟಿ ನೀಡಿದ ಅವರು, ಪ್ರಸಕ್ತ ಹಂಗಾಮಿನ ಮಾವಿನ ಬೆಳೆ, ಹಣ್ಣಿನ ಗುಣಮಟ್ಟ ಹಾಗೂ ಇಳುವರಿ ಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ರೈತರೊಂದಿಗೆ ನೇರ ಸಂವಾದ ನಡೆಸಿ ಮಾರುಕಟ್ಟೆಯಲ್ಲಿ ಸದ್ಯದ ಬೆಲೆ, ಉತ್ಪಾದನಾ ವೆಚ್ಚ, ಮಾರಾಟದ ಸಮಸ್ಯೆಗಳು ಹಾಗೂ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಮಾಹಿತಿ ಪಡೆದುಕೊಂಡರು.
ಮಾವು ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಘೋಷಿಸಿರುವ ಬೆಲೆ ವ್ಯತ್ಯಾಸ ಪಾವತಿ ಯೋಜನೆ ಆರ್ಥಿಕ ನೆರವಾಗಲಿದ್ದು, ಅದರ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ತಲುಪಿಸುವ ಜವಾಬ್ದಾರಿ ಜಿಲ್ಲಾಡಳಿತದ ಮೇಲಿದೆ ಎಂದು ಅವರು ಹೇಳಿದರು.
ನಂತರ ರೋಣೂರಿನ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪಿಡಿಪಿಎಸ್ ಯೋಜನೆಯಡಿ ನಡೆಯುತ್ತಿರುವ ರೈತರ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಿದರು. ತೋಟಗಾರಿಕಾ ಇಲಾಖೆ ಸ್ಥಾಪಿಸಿರುವ ನೋಂದಣಿ ಕೌಂಟರ್ಗಳ ಕಾರ್ಯವೈಖರಿ, ದಾಖಲಾತಿಗಳ ಪರಿಶೀಲನೆ ಹಾಗೂ ಪೂರ್ವಸಿದ್ಧತೆಗಳನ್ನು ಅವಲೋಕಿಸಿದ ಅವರು, ಯಾವುದೇ ರೈತರು ಅನಗತ್ಯವಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಸೂಚಿಸಿದರು.
ನೋಂದಣಿಗಾಗಿ ರೈತರು ಹೆಚ್ಚು ಸಮಯ ಸಾಲಿನಲ್ಲಿ ಕಾಯುವುದನ್ನು ತಪ್ಪಿಸಲು ಅಗತ್ಯವಿರುವ ಕಡೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಬೇಕು. ನೋಂದಣಿ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿರಬೇಕು ಹಾಗೂ ಯಾವುದೇ ಅರ್ಹ ರೈತ ಯೋಜನೆಯಿಂದ ವಂಚಿತರಾಗದಂತೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದು ನಿರ್ದೇಶನ ನೀಡಿದರು.
ಯೋಜನೆ ಕುರಿತು ಇನ್ನೂ ಮಾಹಿತಿ ತಿಳಿದಿರದ ಮಾವು ಬೆಳೆಗಾರರಿಗೂ ವ್ಯಾಪಕ ಜಾಗೃತಿ ಮೂಡಿಸುವ ಜವಾಬ್ದಾರಿ ತೋಟಗಾರಿಕಾ ಇಲಾಖೆಯದ್ದಾಗಿದೆ. ಗ್ರಾಮ ಮಟ್ಟದಲ್ಲಿ ಪ್ರಚಾರ, ಮಾಹಿತಿ ಶಿಬಿರಗಳು ಹಾಗೂ ರೈತ ಸಂಪರ್ಕ ಕಾರ್ಯಕ್ರಮಗಳನ್ನು ಆಯೋಜಿಸಿ ಎಲ್ಲ ಅರ್ಹ ರೈತರು ನೋಂದಣಿ ಮಾಡಿಸಿಕೊಳ್ಳುವಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿಗಳ ಪರಿಶೀಲನಾ ಭೇಟಿಯ ವೇಳೆ ತೋಟಗಾರಿಕಾ ಇಲಾಖೆಯ ಹಿರಿಯ ಅಧಿಕಾರಿ ಶ್ರೀನಿವಾಸನ್, ಇಲಾಖೆಯ ಸಿಬ್ಬಂದಿ, ಪ್ರಮುಖ ರೈತ ಮುಖಂಡರು ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

