ಉಡುಪಿ ಜಿಲ್ಲಾ ಮಟ್ಟದ ಅಕ್ಷರ ಜೋಳಿಗೆ ಕಾರ್ಯಕ್ರಮಕ್ಕೆ ಚಾಲನೆ

JANANUDI.COM NETWORK


ಕೋಟ: ಉಡುಪಿ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ವಿದ್ಯಾರ್ಥಿ ಮತ್ತು ಪಾಲಕ ಮನೆಗಳಿಂದ ಹಳೆಯ ಪುಸ್ತಕ ಸಂಗ್ರಹಿಸಿ ಶಾಲಾ ಮತ್ತು ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ನೀಡುವ ಅಕ್ಷರ ಜೋಳಿಗೆ ಕಾರ್ಯಕ್ರಮಕ್ಕೆ ಶನಿವಾರ ಕೋಡಿಯಲ್ಲಿ ಚಾಲನೆ ನೀಡಲಾಯಿತು.
ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಎನ್.ಹೆಚ್ ನಾಗೂರ್ ಅವರು ಕೋಡಿ ಹಾಜಿ.ಕೆ.ಮೊಹಿದೀನ್ ಬ್ಯಾರಿ ಅನುದಾನಿತ ಪ್ರೌಢಶಾಲೆಯಲ್ಲಿ ಶಾಲಾ ಬ್ಯಾಂಡ್‍ನ್ನು ಬಾರಿಸುವುದರ ಮೂಲಕ ಅಕ್ಷರ ಜೋಳಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪದ್ಮನಾಭ್ ಅವರು ಜಾಥಾಕ್ಕೆ ಚಾಲನೆ ನೀಡಿದರು.
ಹಾಜಿ.ಕೆ.ಮೊಹಿದೀನ್ ಬ್ಯಾರಿ ಅನುದಾನಿತ ಪ್ರೌಢಶಾಲೆ, ಹಾಜಿ.ಕೆ.ಮೊಹಿದೀನ್ ಬ್ಯಾರಿ ಸ್ಮಾರಕ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಬ್ಯಾರೀಸ್ ಸಿ ಸೈಡ್ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿ, ಕೋಡಿ ಪರಿಸರದ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಹಳೆಯ ಸಾಹಿತ್ಯ ಪುಸ್ತಕಗಳನ್ನು ಶಾಲಾ ಗ್ರಂಥಾಲಯಕ್ಕೆ ಪಡೆಯಲಾಯಿತು.
ಬ್ಯಾರೀಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರೆಹಮಾನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ರಘುನಾಥ್, ಸಮೂಹ ಸಂಪನ್ಮೂಲ ವ್ಯಕ್ತಿ ಶಂಕರ್ ಶೆಟ್ಟಿ, ಮುಖ್ಯ ಶಿಕ್ಷಕರಾದ ಜಯಂತಿ, ದುರ್ಗಿ ಪಟಗಾರ್, ಅಶ್ವಿನಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕ ಜಯಶೀಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.