

ಕೋಲಾರ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಶೆರಿನ್ ತಾಜ್ ಅವರು ಇಂದು
ಮುಳಬಾಗಿಲು ಹೈದರಿ ನಗರದ ಸಿಜಿ & ಇಡಿ ಫೌಂಡೇಶನ್ ಹಾಗೂ ಬಿಎಚ್ಎಸ್ ಲರ್ನಿಂಗ್ ಸೆಂಟರ್ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಎನ್ಜಿಒ ಸದಸ್ಯರೊಂದಿಗೆ ಸಭೆ ನಡೆಸಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿದರು.
ಅವರು ಮಾತನಾಡಿ – ಅಲ್ಪಸಂಖ್ಯಾತ ಯುವಕರು ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ (IAS, KAS, IPS, KES, IFS ಹಾಗೂ ಇತರ ಪರೀಕ್ಷೆಗಳು) ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿದೆ. ಇದಕ್ಕಾಗಿ ಎನ್ಜಿಒಗಳು ತಮ್ಮ ಮಟ್ಟಿನಲ್ಲಿ ಸಮಗ್ರ ಸಮೀಕ್ಷೆ ನಡೆಸಿ, ಪ್ರತಿಭಾವಂತ ಹಾಗೂ ಉತ್ಸಾಹಿ ಯುವಕರನ್ನು ಗುರುತಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.
ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ವಿಶೇಷ ತರಬೇತಿ ಕೇಂದ್ರಗಳು, ಉಚಿತ ಕೋಚಿಂಗ್ ಸೌಲಭ್ಯ, ವಿದ್ಯಾರ್ಥಿವೇತನ ಸೇರಿದಂತೆ ಅಲ್ಪಸಂಖ್ಯಾತ ಇಲಾಖೆಯ ವಿವಿಧ ಸೌಲಭ್ಯಗಳನ್ನು ಯುವಕರಿಗೆ ತಲುಪಿಸಲು ನಿಗಮ ಬದ್ಧವಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರತಿನಿಧಿಗಳು ಮಾತನಾಡಿ – ಯುವಕರನ್ನು ಸಮಾಜಮುಖಿ ಚಟುವಟಿಕೆಗಳಿಗೆ ಪ್ರೋತ್ಸಾಹಿಸುವುದರ ಜೊತೆಗೆ ಶಿಕ್ಷಣ, ಉದ್ಯೋಗ ಹಾಗೂ ಸ್ವಾವಲಂಬನೆಗೆ ಅಗತ್ಯವಾದ ಮಾರ್ಗದರ್ಶನ ನೀಡಲು ನಾವು ಸದಾ ಸಜ್ಜಾಗಿದ್ದೇವೆ ಎಂದು ಅಭಿಪ್ರಾಯಪಟ್ಟರು.
ಶೆರಿನ್ ತಾಜ್ ಅವರ ಈ ಭೇಟಿಯಿಂದ ಮುಳಬಾಗಿಲು ಪ್ರದೇಶದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಾಗೂ ಯುವಕರಲ್ಲಿ ಹೊಸ ಉತ್ಸಾಹ ಹುಟ್ಟಿಕೊಂಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಉನ್ನತ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸನ್ನದ್ಧರಾಗುವ ನಿರೀಕ್ಷೆ ವ್ಯಕ್ತವಾಗಿದೆ.




































