ಪ್ರತಿಯೊಂದು ಜೀವವನ್ನೂ ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ- ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಕೋಲಾರ : ಪ್ರತಿಯೊಂದು ಜೀವವನ್ನೂ ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ . ಪ್ರತಿಯೊಂದು ಗ್ರಾಮವೂ ಕೊರೊನಾದಿಂದ ಮುಕ್ತವಾಗುವಂತೆ ಮಾಡಬೇಕು ಎಂಬ ಸಂಕಲ್ಪದಿಂದ ಜಿಲ್ಲೆಯ ಪ್ರತಿ ಗ್ರಾಮದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು . ಇದಕ್ಕಾಗಿ ಪಕ್ಷಭೇದ ಮರೆತು ಎಲ್ಲರೂ ಕೈಜೋಡಿಸಬೇಕು ಎಂದು ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಅರವಿಂದ ಲಿಂಬಾವಳಿ ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾನ್ಯ ಪ್ರಧಾನ ಮಂತ್ರಿಗಳೊಂದಿಗೆ ಕೋವಿಡ್ 19 ( ಕರೋನ ವೈರಸ್ ) ವಿಡಿಯೋ ಸಂವಾದದಲ್ಲಿ ಭಾಗವಹಿಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ , ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಿ , ತ್ವರಿತವಾಗಿ ಸೋಂಕಿತರನ್ನು ಪತ್ತೆ ಹಚ್ಚಿ , ಕೂಡಲೇ ಅವರಿಗೆ ಚಿಕಿತ್ಸೆ ಆರಂಭಿಸುವುದರ ಮೂಲಕ ಕರೋನಾ ತಡೆಗೆ ಸಹಕರಿಸಬೇಕು ಎಂದರು . ಜಿಲ್ಲೆಯಲ್ಲಿ ಹೋಮ್ ಐಸೋಲೇಷನ್‌ನಲ್ಲಿರುವ ಸೋಂಕಿತರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸದೇ ಇರುವವರನ್ನು ಕೋವಿಡ್ ಕೇರ್ ಸೆಂಟರ್‌ಗೆ ವರ್ಗಾಯಿಸಲಾಗುವುದು . ಕೋವಿಡ್ ದೃಢಪಟ್ಟು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯದ ಸುಧಾರಣೆಯನ್ನು ಆಶಾ ಕಾರ್ಯಕರ್ತೆಯರು , ಆರೋಗ್ಯ ಕಾರ್ಯಕರ್ತರು ಆಗಿಂದಾಗ್ಗೆ ಮನೆ ಭೇಟಿ ನೀಡಿ ಪರಿಶೀಲಿಸಬೇಕು . ಸೋಂಕಿತರು ಮನೆ ಬಿಟ್ಟು ಹೊರಗೆ ತಿರುಗಾಡದಂತೆ ನಿಗಾ ವಹಿಸಬೇಕು . ಹೋಮ್ ಐಸೊಲೇಶನ್‌ನಲ್ಲಿ ಇರುವವರನ್ನು ದೂರವಾಣಿ ಮುಖಾಂತರ ಆರೋಗ್ಯದ ಬಗ್ಗೆ ಮಾಹಿತಿ ಕಲೆ ಹಾಕಲಾಗುವುದು . ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುವುದು ಖಾಸಗಿಯವರು ಕೋವಿಡ್ ಕೇರ್ ಸೆಂಟರ್ ತೆರೆಯಲು ಸಹಕಾರ ನೀಡುತ್ತೇವೆ . ಅಲ್ಲಿ ಕೆಲಸ ಮಾಡುವ ಆರೋಗ್ಯ ಸಹಾಯಕಿಯರಿಗೆ ಸರ್ಕಾರ ಗೌರವಧನ ನೀಡುತ್ತದೆ ಎಂದು ತಿಳಿಸಿದರು . ಅವಶ್ಯಕ ಸೇವೆ ಅಡಿಯಲ್ಲಿ ಜಿಲ್ಲೆಯಲ್ಲಿ 30 ಕಂಪನಿಗಳು ಕೆಲಸ ಮಾಡುತ್ತಿದ್ದು , ಅಲ್ಲಿನ ಕಾರ್ಮಿಕರಿಗೆ ಸೀನಿಂಗ್ ಮಾಡುವಂತೆ ಸೂಚಿಸಲಾಗಿದೆ . ಒಂದು ವೇಳೆ ಕಾರ್ಮಿಕರಿಗೆ ಕೊರೊನ ಬಂದರೆ ಕಂಪನಿಯವರೇ ಕೋವಿಡ್ ಕೇರ್ ಸೆಂಟರ್ ತೆರೆಯಬೇಕು . ಜಿಲ್ಲೆಯಲ್ಲಿ ಕೋವಿಡ್ ಟೆಸ್ಟ್‌ಗಳ ಸಂಖ್ಯೆ ಹೆಚ್ಚಿಸಲಾಗುವುದು . ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತಿದಿನ 1500 ಟೆಸ್ಟ್ ಮಾಡಲಾಗುತ್ತಿತ್ತು , ಇದನ್ನು 1800 ಕ್ಕೆ ಹೆಚ್ಚಿಸಲಾಗುವುದು . ಬ್ಲ್ಯಾಕ್ ಫಂಗಸ್‌ಗೆ ಜಾಲಪ್ಪ ಆಸ್ಪತ್ರೆಯಲ್ಲಿ 30 ಬೆಡ್‌ಗಳ ವಾರ್ಡ್ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದರು . ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ . ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ. ನಾಗರಾಜ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ , ಕೆ.ಜಿ.ಎಫ್ ಪೊಲೀಸ್ ವರಿಷ್ಠಾಧಿಕಾರಿಗಳಾದ ಇಲಕ್ಕಿಯಾ ಕರುಣಾಕರನ್ , ಅಪರ ಜಿಲ್ಲಾಧಿಕಾರಿಗಳಾದ ಡಾ.ಸ್ನೇಹ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ವಿಜಯ್ ಕುಮಾರ್ , ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಜಗದೀಶ್ , ಸರ್ವೇಕ್ಷಣಾಧಿಕಾರಿಗಳಾದ ಚಾರಿಣಿ , ಡಾ.ವಿಜಯಕುಮಾರಿ ಉಪಸ್ಥಿತರಿದ್ದರು.