

ಕುಂದಾಪುರ: ಮೊಬೈಲ್ ವಿಚಾರವಾಗಿ ಗಲಾಟೆ ಮಾಡಿದ ಪತಿ ಕೋಪಗಂಡು ಪತ್ನಿಯನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಘಟನೆ ಜೂ.19 ರಾತ್ರಿ ವೇಳೆ ನಡೆದಿದೆ. ಪ್ರಕರಣದ ಆರೋಪಿ ಮೃತರ ಪತಿ ಗಣೇಶ ಪೂಜಾರಿ(42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸಮಠ ನಿವಾಸಿ ರೇಖಾ(27) ಕೊಲೆಗೀಡಾದ ಮಹಿಳೆ. ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ ಹಾಗೂ ರೇಖಾಳಿಗೆ 8 ವರ್ಷದ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದರು. ರೇಖಾ ಪೆಟ್ರೋಲ್ ಬಂಕ್ವೊಂದರಲ್ಲಿ ಕೆಲಸಕ್ಕಿದ್ದು ಗಣೇಶ್ ಮೊಬೈಲ್ ವಿಚಾರದಲ್ಲಿ ಆಗಾಗ್ಗೆ ಗಲಾಟೆ ಮಾಡುತ್ತಿದ್ದ. ಗುರುವಾರ ತಡರಾತ್ರಿ ಮನೆಗೆ ಬಂದು ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳ ಮಾಡಿದ ಗಣೇಶ, ಪತ್ನಿಗೆ ಕತ್ತಿಯಿಂದ ಕಡಿದನು. ಇದರಿಂದ ಗಂಭೀರ ಗಾಯಗೊಂಡ ರೇಖಾ ಸ್ಥಳದಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ. ಅಲ್ಲಿಂದ ಪರಾರಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಗಣೇಶ್ ಪೂಜಾರಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


