ಸಾಮಾಜಿಕ ಕಾರ್ಯಕರ್ತ ಎಸ್ . ನಾರಾಯಣ ಸ್ವಾಮಿಯ ದೂರನ್ನು ಆಧರಿಸಿ,ಆರು ಜನ ಅಧಿಕಾರಿಗಳ ವಿರುದ್ಧ ತನಿಖೆಗೆ ಎಸಿಬಿಗೆ ಆದೇಶ -269 ಕೋಟಿ ನಷ್ಟದ ಹಗರಣ !! 

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಸಾಮಾಜಿಕ ಕಾರ್ಯಕರ್ತ ಎಸ್ . ನಾರಾಯಣಸ್ವಾಮಿ

ಶ್ರೀನಿವಾಸಪುರ : ಅಕ್ರಮವಾಗಿ ಬ್ಯಾಂಕ್ ಖಾತೆಗಳನ್ನು ತೆರೆದು ರಾಜ್ಯದ ಬೊಕ್ಕಸಕ್ಕೆ 269 ಕೋಟಿ ನಷ್ಟ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ , ಹಾಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಅಮಿತಾ ಪ್ರಸಾದ್ ಸೇರಿದಂತೆ ಒಟ್ಟು ಆರು ಜನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ , ನಾಲ್ಕು ತಿಂಗಳಲ್ಲಿ ವರದಿ ಸಲ್ಲಿಸಿ ‘ ಎಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ ( ಎಸಿಬಿ ) ಆದೇಶಿಸಿದೆ . ಕೋಲಾರದ ಮಾಸ್ತಿ ಲೇಔಟ್‌ನ ಸಾಮಾಜಿಕ ಕಾರ್ಯಕರ್ತ ಎಸ್ . ನಾರಾಯಣಸ್ವಾಮಿ ಸಲ್ಲಿಸಿರುವ ಖಾಸಗಿ ದೂರನ್ನು ಆಧರಿಸಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಲಕ್ಷ್ಮಿನಾರಾಯಣ ಭಟ್ ಈ ಆದೇಶ ನೀಡಿದ್ದಾರೆ . ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ( ಆರ್‌ಡಿಪಿಆರ್ ) ಪ್ರಧಾನ ಕಾರ್ಯದರ್ಶಿಗಳಾಗಿದ್ದ ಮೂವರು ಐಎಎಸ್ ಅಧಿಕಾರಿಗಳು , ಇಲಾಖೆ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಡಾ.ಬೋರೇಗೌಡ , ಗ್ರಾಮೀಣ ನೀರು ಸರಬರಾಜು ವಿಭಾಗದ ಉಪ ಕಾರ್ಯದರ್ಶಿಯಾಗಿದ್ದ ರಾಮಕೃಷ್ಣ , ಅಂದಿನ ಸಿಂಡಿಕೇಟ್ ಬ್ಯಾಂಕ್ ( ಈಗ ಕೆನರಾ ಬ್ಯಾಂಕ್ ಜೊತೆ ವಿಲೀನವಾಗಿದೆ ) ಮ್ಯಾನೇಜರ್ ಸೀಲಂ ಗಿರಿ ವಿರುದ್ಧ ರಾಜ್ಯ ಬೊಕ್ಕಸದ 3405.21 ಕೋಟಿ ಮೊತ್ತವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಹೊರಿಸಲಾಗಿದೆ .
ದೂರು ದಾಖಲಿಸಿಕೊಳ್ಳದ ಎಸಿಬಿ ‘ ಎಸಿಬಿಯ ಮಹಾನಿರ್ದೇಶಕರಿಗೆ 2019 ರ ಡಿಸೆಂಬರ್ 26 ರಂದು ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ‘ ಎಂದು ಫಿರ್ಯಾದುದಾರ ನಾರಾಯಣ ಸ್ವಾಮಿ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದರು . ಇದೀಗ ವಿಶೇಷ ನ್ಯಾಯಾಲಯದ ( ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ದಾಖಲಾ ಗುವ ಪ್ರಕರಣದ ವಿಚಾರಣೆ ) ನ್ಯಾಯಾಧೀಶ ಕೆ.ಲಕ್ಷ್ಮಿನಾರಾಯಣ ಭಟ್ ದೂರನ್ನು ಸಂಸ್ಥೆಯ ಅಪರಾಧ ಎಂದು ಪರಿಗಣಿಸಿದ್ದಾರೆ . ಭ್ರಷ್ಟಾಚಾರ ನಿಗ್ರಹ ಕಾಯ್ದೆ -1988 ರ ಕಲಂ 13 ( 1 ) , 13 ( 2 ) ಮತ್ತು ಭಾರತೀಯ ದಂಡ ಸಂಹಿತೆಯ ಕಲಂ 465 , 467 , 468 ಮತ್ತು 471 ರ ಅನುಸಾರ ತನಿಖೆಗೆ ನಿರ್ದೇಶಿಸಿದ್ದಾರೆ .