

ಉಡುಪಿ: ಜಿಲ್ಲೆಯ ಬ್ರಹ್ಮಾವರದ ಗಾಂಧಿನಗರದ ಬೈಕಾಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, 31 ವರ್ಷದ ವ್ಯಕ್ತಿಯೊಬ್ಬ ತನ್ನ ವಯಸ್ಸಾದ ಪೋಷಕರನ್ನು ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ನಡೆದಿದೆ.
ಮೃತರನ್ನು ಟ್ರಕ್ ಚಾಲಕ ಮೆಹಬೂಬ್ ಅಲಿ (55) ಮತ್ತು ಅವರ ಪತ್ನಿ ಶಂಶಾದ್ ಬೇಗಂ (50) ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅವರ ಮಗ ಆರೋಪಿ ಶಾಹೀದ್ ಅಲಿಯನ್ನು ಬಂಧಿಸಲಾಗಿದೆ.
ಪೊಲೀಸರ ಪ್ರಕಾರ, ಝೊಮ್ಯಾಟೊದಲ್ಲಿ ಫುಡ್ ಡೆಲಿವರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಶಹೀದ್ ಅಲಿ, ಸಣ್ಣ ವಿಚಾರಕ್ಕೆ ತನ್ನ ತಂದೆ-ತಾಯಿಯೊಂದಿಗೆ ಜಗಳವಾಡಿದ್ದಾನೆ. ಬಳಿಕ ತನ್ನ ಪೋಷಕರ ತಲೆಗೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತನ್ನ ತಂದೆ ಆಗಾಗ್ಗೆ ತನ್ನ ಮೇಲೆ ಹಲ್ಲೆ ನಡೆಸುತ್ತಿದ್ದರು ಮತ್ತು ಬೈಯುತ್ತಿದ್ದರು ಮತ್ತು ತಾಯಿ ಅದಕ್ಕೆ ಬೆಂಬಲ ನೀಡುತ್ತಿದ್ದರು ಎಂದು ಶಹೀದ್ ಅಲಿ ಹೇಳಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಟ್ಟಿನ ಭರದಲ್ಲಿ ಅವನು ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.
ಘಟನೆ ನಂತರ, ಶಹೀದ್ ಸ್ವತಃ ತಾನೇ ಪೊಲೀಸರ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ ಕೊಲೆಯ ಬಗ್ಗೆ ಮಾಹಿತಿ ನೀಡಿದ್ದಾನೆ. ತನ್ನ ಪೋಷಕರಿಂದ ದೀರ್ಘಕಾಲದವರೆಗೆ ಅನುಭವಿಸಿದ ಮಾನಸಿಕ ಕಿರುಕುಳವೇ ಇದಕ್ಕೆ ಕಾರಣ ಎಂದು ಆತ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.

