

ಶ್ರೀನಿವಾಸಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮವನ್ನು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಉದ್ಘಾಟಿಸಿದರು.
ಶೈಕ್ಷಣಿಕ ಪ್ರಗತಿಗೆ ಶ್ರದ್ಧೆ ಹಾಗೂ ಪರಿಶ್ರಮ ಪೂರಕ – ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ
ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮವನ್ನು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿನಿಯರು ಶ್ರದ್ಧೆ ಹಾಗೂ ಪರಿಶ್ರಮದ ಮೂಲಕ ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇದರು.
ತಾಲ್ಲೂಕಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದೆ. ಪಟ್ಟಣದ ಎರಡು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಅಗತ್ಯವಿರುವ ಸಭಾಂಗಣ ನಿರ್ಮಿಸಲಾಗುವುದು ಎಂದು ಹೇಳಿದರು.
ರೂ.1.50 ಕೋಟಿ ವೆಚ್ಚದಲ್ಲಿ ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ನವೀಕರಣ ಕಾರ್ಯ ಕೈಗೊಳ್ಳಲಾಗಿದೆ. ಶ್ರೀರಾಮ ದೇವಾಲಯನ್ನು ರೂ.1 ಕೋಟಿ ವೆಚ್ಚದಲ್ಲಿ ನವೀಕರಿಸಲಾಗುವುದು. ತಾಲ್ಲೂಕಿನ ಎರಡು ಕಡೆ ಕೈಗಾರಿಕಾ ಪ್ರದೇಶ ಪ್ರಾರಂಭಿಸಲಾಗುವುದು. ರಾಜ್ಯದಲ್ಲಿ ಹಣಕಾಸಿನ ಮುಗ್ಗಟ್ಟಿನ ನಡುವೆಯೂ, ಕಾಡಿ ಬೇಟಿ ಸರ್ಕಾರದಿಂದ ಅನುದಾನ ತಂದು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಶ್ರೀನಿವಾಸಪುರದ ರಸ್ತೆಗಳನ್ನು ಸಿಮೆಂಟ್ ರಸ್ತೆಗಳನ್ನಾಗಿ ಪರಿವರ್ತಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಎನ್.ಶಂಕರೇಗೌಡ ಮಾತನಾಡಿ, ಕಾಲೇಜು ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರಲಾಗಿದೆ. ಉತ್ತಮ ಫಲಿತಾಂಶಕ್ಕಾಗಿ ಉಪನ್ಯಾಸಕರು ಸಾಂಘಿಕ ಪ್ರಯತ್ನ ಮಾಡುತ್ತಿದ್ದಾರೆ. ಕ್ರೀಡೆ ಹಾಗೂ ಸಾಂಸ್ಕøತಿಕ ಕ್ಷೇತ್ರದಲ್ಲೂ ಕಾಲೇಜು ಮುಂಚೂಣಿಯಲ್ಲಿದೆ. ವಿದ್ಯಾರ್ಥಿನಿಯರ ಸಾಂಸ್ಕøತಿಕ ಅಗತ್ಯ ಪೂರೈಸುವ ಉದ್ದೇಶದಿಂದ ಆಡಿಟೋರಿಯಂ ನಿರ್ಮಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.
ಸಾಹಿತಿ ಆರ್.ಚೌಡರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರಿ ಶಾಲಾ ಕಾಲೇಜಿನಲ್ಲಿ ಓದುವುದು ಹೆಮ್ಮೆಯ ಸಂಗತಿಯಾಗಿದೆ. ಯಾವುದೇ ಕಾರಣಕ್ಕೂ ಕೀಳರಿಮೆ ಹೊಂದಬೇಕಾಗಿಲ್ಲ. ಕಾಲೇಜಿನ ಕಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳ ಉತ್ತಮ ಮಾದರಿಯನ್ನು ಅನುಸರಿಸಬೇಕು. ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಟಿ.ರಮೇಶ್ ಮಾತನಾಡಿ, ವಿದ್ಯಾರ್ಥಿನಿಯರು ತಾಳ್ಮೆ ಬೆಳೆಸಿಕೊಳ್ಳಬೇಕು. ತಾಳ್ಮೆಯಿಂದ ಮಾಡುವ ಕೆಲಸದಲ್ಲಿ ಯಶಸ್ಸು ಅಡಗಿರುತ್ತದೆ ಎಂದು ಹೇಳಿದರು.
ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ವೇಣುಗೋಪಾಲರೆಡ್ಡಿ ಮಾತನಾಡಿದರು. ವಿದ್ಯಾರ್ಥಿನಿಯರು ತಮ್ಮ ಅಭಿಪ್ರಾಯ ತಿಳಿಸಿದರು.
ಈ ಸಂದರ್ಭದಲ್ಲಿ ಕಳೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಸನ್ಮಾನಿಸಿ, ನೆನಪಿನ ಕಾಣಿಕೆ ನೀಡಲಾಯಿತು.ವಿದ್ಯಾರ್ಥಿನಿಯರಿಂದ ಭರತನಾಟ್ಯ ಮತ್ತಿತರ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಮುತ್ತಕಪಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ.ಕೆ.ನಾರಾಯಣಸ್ವಾಮಿ, ಉಪನ್ಯಾಸಕರಾದ ಗೋಪಿನಾಥ್, ಬಾಲಾಜಿ, ಶ್ರೀನಾಥ್, ರಘುಪತಿ, ಡಾ.ಫಯಾಜ್ ಅಹ್ಮದ್, ಗೋಪಾಲನ್, ಶಿವಾರೆಡ್ಡಿ, ಉಪನ್ಯಾಸಕಿ ವೀಣಾ, ಉಪನ್ಯಾಸಕಿಯರಾದ ಸುಮ, ಮಾನಸ ಹಾಗೂ ಸಿಬ್ಬಂದಿ ಇದ್ದರು.

